ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ; ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದ ಸಚಿವ ಶಿವರಾಮ್‌ ಹೆಬ್ಬಾರ್



ಹಾವೇರಿ: ಹಾವೇರಿಯಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರಕಿದ್ದು, ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ನಾಡ ಧ್ವಜವನ್ನು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಧ್ವಜಾರೋಹಣ ನೆರವೇರಿಸಿದರು. 

ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಚಿವ ಶಿವರಾಮ್‌ ಹೆಬ್ಬಾರ್,  ಈ ಹಿಂದೆ ಯಾವತ್ತೂ ಆಗದ ರೀತಿಯ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನ ಇದಾಗಲಿದೆ. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು. ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.