ಈ ಬಾರಿ ಕಾರ್ಕಳ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಬದಲು ನನಗೆ ಬಿಜೆಪಿಯಿಂದ ಟಿಕೆಟ್ ನೀಡಿ: ಡಾ. ಮಮತಾ ಹೆಗ್ಡೆ ಮನವಿ

ಉಡುಪಿ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸಲು ನಿರ್ಧರಿಸಿದ್ದು, ಈ ಬಾರಿ BJP ಪಕ್ಷವು ಸುನಿಲ್ ಕುಮಾರ್ ಬದಲು ನನಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು  ಸಾವಿತ್ರಿ ಸತ್ಯವಾನ್ ಟ್ರಸ್ಟ್‍ನ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಮನವಿ ಮಾಡಿದ್ದಾರೆ.

ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸುನಿಲ್ ಕುಮಾರ್ ಅವರಿಗೆ ಪಕ್ಷ ಈಗಾಗಲೇ ಸಾಕಷ್ಟು ಅವಕಾಶ ನೀಡಿದ್ದರೂ ಕಾರ್ಕಳ ಕ್ಷೇತ್ರ ನಿರೀಕ್ಷಿತ ಮಟ್ಟದಲ್ಲಿ


ಅಭಿವೃದ್ಧಿ ಕಂಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನನಗೆ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ಚುನಾವಣೆಗೆ ನಿಲ್ಲಲು BJP ಟಿಕೆಟ್ ನೀಡಿದಿದ್ದರೆ ಸ್ವತಂತ್ರ ಅಭ್ಯರ್ಥಿ ಅಥವಾ ಬೇರೆ ಪಕ್ಷದಿಂದ ಕಣಕ್ಕೆ ಇಳಿಯುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಡಾ.ಮಮತಾ ಹೆಗ್ಡೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಶಾಲಾಕ್ಷಿ ಶೆಟ್ಟಿ, ವೇದಾವತಿ ಹೆಗ್ಡೆ, ಮಾಯಾ ಹೆಗ್ಡೆ, ಪ್ರಕಾಶ್ ಶೆಟ್ಟಿ, ವಿನೂತನ ಶೆಟ್ಟಿ, ಪ್ರಕಾಶ್ ಶೆಟ್ಟಿ ಹಾಜರಿದ್ದರು.