ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದು, ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 7 ತಂಡಗಳನ್ನು ರಚಿಸಿದೆ.
ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ KAS ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ಮಾಡಾಳ್ ಪ್ರಶಾಂತ್ ಅವರ ನಿವಾಸ ಮತ್ತು ಕಚೇರಿ ಮೇಲೆ ನಡೆಸಿದ ದಾಳಿ ವೇಳೆ 6 ಕೋಟಿ ರೂ.ಗೂ ಹೆಚ್ಚು ನಗದು ಪತ್ತೆಯಾಗಿತ್ತು.
ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 7 ತಂಡಗಳು ಈಗಾಗಲೇ ರಾಜ್ಯದಾದ್ಯಂತ ಟ್ರ್ಯಾಕಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಹಾಗು ದಾವಣಗೆರೆ ನಗರಗಳ ವಿವಿಧೆಡೆ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
