ಇಂದು ಸಂಜೆ ಲಕ್ಷ್ಮಣ ಸವದಿ ಕಾಂಗ್ರೆಸ್​ ಪಕ್ಷ ಸೇರ್ಪಡೆ; ಪರಿಷತ್ತಿಗೆ ರಾಜೀನಾಮೆ

ಬೆಂಗಳೂರು: ಬಿಜೆಪಿ ವಿರುದ್ಧ ಸಮರ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಕಾಂಗ್ರೆಸಿಗೆ ಬರುವುದಾದರೆ ಲಕ್ಷ್ಮಣ ಸವದಿಯವರನ್ನು ನಾಯಕರೆಲ್ಲರೂ ಸ್ವಾಗತಿಸುತ್ತೇವೆ. ಲಕ್ಷ್ಮಣ ಸವದಿ ಜೊತೆ ನಾವು ಎಲ್ಲವನ್ನೂ ಚರ್ಚೆ ಮಾಡಿದ್ದು, ಸಂಜೆ 4 ಗಂಟೆಗೆ MLC ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಡಿಕೆಶಿ ಹೇಳಿದರು.

BJP ಕೊಟ್ಟ ಮಾತಿನಂತೆ ನಡೆದಿಲ್ಲ, ಈ ಕಾರಣದಿಂದ ಪಕ್ಷ ತ್ಯಜಿಸುತ್ತಿದ್ದೇನೆ. ಇಂದು ವಿಧಾನಪರಿಷತ್​ನ BJP ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್​ ನೀಡುವಂತೆ ಕೇಳಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಅಥಣಿ ಕ್ಷೇತ್ರಕ್ಕೆ ಯೋಜನೆ ರೂಪಿಸುತ್ತೇನೆ  ಎಂದು ಮಾಜಿ  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನನ್ನ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರ ಅನುಮತಿ ಪಡೆದಿದ್ದು, ಇಂದು ಸಂಜೆ 4 ಗಂಟೆಗೆ MLC (ಪರಿಷತ್ ಸದಸ್ಯತ್ವ)ಕ್ಕೆ ರಾಜೀನಾಮೆ ನೀಡುವೆ. ಇಂದು ಸಂಜೆ 4.30ಕ್ಕೆ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ನಾನು ಬೆಳಗಾವಿ ಜಿಲ್ಲೆಗೆ ಸೀಮಿತವಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ, ಬದಲಾಗಿ ಇಡೀ ರಾಜ್ಯ ಸುತ್ತಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶಕ್ತಿಮೀರಿ ಪ್ರಯತ್ನ ಮಾಡುವೆ,  ರಾಜ್ಯದ ಇತರೆ ಭಾಗಗಳಲ್ಲಿ ನನ್ನನ್ನು ಬಳಸಿಕೊಳ್ಳುವುದಾಗಿ ಕಾಂಗ್ರೆಸ್  ನಾಯಕರು ಹೇಳಿದ್ದಾರೆ ಎಂದು ಹೇಳಿದರು.