ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಳಿನ್‌ ಕುಮಾರ್‌ ಕಟೀಲ್‌

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಸದಸ್ಯರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಗೆಲುವಿನ ನಂತರ ರಾಜ್ಯದಲ್ಲಿ ಆಪರೇಷನ್‌ ಕಮಲ ನಡೆದು ಬಿಜೆಪಿ ಅಧಿಕಾರಕ್ಕೆ ಏರಿತು. ಅಧಿಕಾರ ಸಿಕ್ಕಿದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದ ಯಡಿಯೂರಪ್ಪ ರಾಜೀನಾಮೆ ನೀಡಿ ಮುಖ್ಯಮಂತ್ರಿ ಪಟ್ಟ ಏರಿದ್ದರು. ತೆರವಾದ ಹುದ್ದೆಗೆ ಮೂರು ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ನಳಿನ್‌ ಕುಮಾರ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿತ್ತು.