ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ; ಎಫ್‌ಎಸ್‌ಎಲ್‌ನವರಿಂದ ವೈಜ್ಞಾನಿಕ ತನಿಖೆ ಆಧರಿಸಿ ಕ್ರಮ: ಡಾ.ಪರಮೇಶ್ವರ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಎಫ್‌ಎಸ್‌ಎಲ್‌ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟಿಂಗ್ ಮಾಡಿದ್ದಾರೆ. 'ನಾಸೀರ್ ಸಾಬ್ ಜಿಂದಾಬಾದ್' ಎಂದು ಹೇಳಲಾಗಿದೆ ಅಂತ ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು 'ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರು' ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.

ಈಗಾಗಲೇ ಎಫ್‌ಎಸ್‌ಎಲ್‌ನವರು ಪರೀಶೀಲನೆ ಕೈಗೊಂಡಿದ್ದಾರೆ. ಎಲ್ಲ ವೀಡಿಯೋ ತುಣುಕುಗಳನ್ನು ಸಂಗ್ರಹಿಸುತ್ತಿದ್ದಾರೆ. ಅಧಿಕೃತವಾಗಿ ಸುದ್ದಿ ವಾಹಿನಿಯಲ್ಲಿ ಮೊದಲು ಪ್ರಸಾರವಾದ ವೀಡಿಯೋಗಳನ್ನು ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಬಿಜೆಪಿಯವರು ಕೊಟ್ಟಿರುವ ದೂರನ್ನು ಸುಮೋಟೋ ಜತೆ ಸೇರಿಸಲಾಗುವುದು ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಎಲ್ಲವನ್ನು ಪರಿಶೀಲನೆ ನಡೆಸಲಾಗುತ್ತಿವೆ. ಘೋಷಣೆ ಕೂಗಿದರೂ ಎನ್ನಲಾದ ಸ್ಥಳದಲ್ಲಿ ಯಾರಿದ್ದರು ಅನ್ನುವುದನ್ನು ಗುರುತಿಸಿ, ಅವರನ್ನು ವಿಚಾರಣೆ ನಡೆಸಲಾಗುತ್ತೆದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಏನೆಲ್ಲ ಕಾನೂನು ರೀತ್ಯ ಕ್ರಮ ಜರುಗಿಸಬೇಕೊ ಅದು ಆಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.