ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ

 
ಬೆಂಗಳೂರು: ಕೆಆರ್​ಪಿಪಿ ಪಕ್ಷ ಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. 

ಈ ಮೂಲಕ ಜನಾರ್ದನ ರೆಡ್ಡಿ ತವರಿಗೆ ಮರಳಿದ್ದಾರೆ. ಹಾಗೆ ಬಿಜೆಪಿಯಲ್ಲಿ ತಮ್ಮ ಕೆಆರ್​ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಮುನ್ನ 200ಕ್ಕೂ ಅಧಿಕ ಕೆಆರ್‌ಪಿಪಿ ಪದಾಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದರು. ಪಕ್ಷದ ಎಲ್ಲರ ಒಪ್ಪಿಗೆ ಬಳಿಕವೇ ಸೇರ್ಪಡೆ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರು. ರಾಜ್ಯ ಬಿಜೆಪಿ ನಾಯಕರ ಜೊತೆ ಜೊತೆಗೆ ಗೃಹ ಸಚಿವ ಅಮಿತ್ ಶಾ ಜೊತೆ ಒಂದು ಸುತ್ತಿನ ಮಾತುಕತೆಯನ್ನು ಕೂಡ ಜನಾರ್ಧನ ರೆಡ್ಡಿ ನಡೆಸಿದ್ದರು.