.jpg)
ಮೂಳೂರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ; ಕಾಪು ಭಾರತ್ ನಗರದ ನಿವಾಸಿ ದುರ್ಮರಣ; ಅವರ ಪತ್ನಿ ಸ್ಥಿತಿ ಗಂಭೀರ
ಉಚ್ಚಿಲ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯ ಗೊಂಡಿರುವ ಅವರ ಪತ್ನಿ ಸಾವರ್ ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತ್ತಿದ್ದರು ಎನ್ನಲಾಗಿದೆ. ಈ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಇವರಿಬ್ಬರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಹಿದಾಯತ್ತುಲ್ಲಾ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ರಜೆಯಲ್ಲಿ ಊರಿಗೆ ಬಂದಿದ್ದರು. ಕೆಲವೇ ದಿನಗಳಲ್ಲಿ ಮತ್ತೆ ಸೌದಿಗೆ ವಾಪಸ್ ಹೋಗುವವರಿದ್ದರು ಎಂದು ತಿಳಿದು ಬಂದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.