ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ: ರಾಜ್ಯಾದ್ಯಂತ ನಾಳೆ ಸರ್ಕಾರಿ ರಜೆ ಘೋಷಣೆ; ರಾಜ್ಯದಲ್ಲಿ 3 ದಿನ ಶೋಕಾಚರಣೆ; ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ: ರಾಜ್ಯಾದ್ಯಂತ ನಾಳೆ ಸರ್ಕಾರಿ ರಜೆ ಘೋಷಣೆ; ರಾಜ್ಯದಲ್ಲಿ 3 ದಿನ ಶೋಕಾಚರಣೆ; ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ

ಬೆಂಗಳೂರು: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಇಂದು ವಿಧಿವಶರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತಿದ್ದು, ಅಂತಿಮ ವಿಧಿವಿಧಾನಗಳನ್ನು ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುತ್ತಿದೆ.

ನಾಳೆ ಬೆಳಗ್ಗೆಯೇ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ಸ್ಥಳಾಂತರಿಸಲಾಗುತ್ತಿದ್ದು. ಬಳಿಕ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು, ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಎಸ್.ಎಂ.ಕೃಷ್ಣ ರಾಜಕೀಯ ಜೀವನ

ಎಸ್​ ಎಂ ಕೃಷ್ಣ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

ಮೊದಲ ಬಾರಿಗೆ 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದರು. 1968ರಲ್ಲಿ ಲೋಕಸಭೆಗೆ ಚುನಾಯಿತರಾದರು. 1971ರಲ್ಲಿ ಮರು ಚುನಾಯಿತರಾಗಿ ಮತ್ತೆ 1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು.

ಇದೇ ಸಮಯದಲ್ಲಿ ಎಸ್ ಎಂ ಕೃಷ್ಣ ಅವರು ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. 1983ರಲ್ಲಿ ಉದ್ಯಮ ಖಾತೆ ಮತ್ತು 1984ರಲ್ಲಿ ವಿತ್ತ ಖಾತೆಯ ಸಚಿವರಾದರು. 1989ರಿಂದ 1992ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ಅಲ್ಲದೆ 1992 ರಿಂದ 1994 ರವರೆಗೆ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸೇವೆ ಸಲ್ಲಿಸಿದರು.

1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಸ್ಎಂಕೃಷ್ಣ ಸೋಲು ಅನುಭವಿಸಬೇಕಾಯಿತು. ಆ ವೇಳೆ ರಾಜಕೀಯದಲ್ಲಿ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಬಳಿಕ 1989 ರಿಂದ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಎಸ್ ಎಂ ಕೃಷ್ಣ ಅವರು, 1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅಲ್ಲದೆ 1999 ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು.

1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಎಸ್ಎಂ ಕೃಷ್ಣ ಮುನ್ನೆಡೆಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.1999 ರಿಂದ 2004 ರವರೆಗೆ ಎಸ್.ಎಂ.ಕೃಷ್ಣ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.

ಎಸ್ ಎಂ ಕೃಷ್ಣ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. 2009- 2012ರ ವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದ ಕೃಷ್ಣ ಅವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್​ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದಿದ್ದರು.

ಎಸ್.ಎಂ.ಕೃಷ್ಣ ಅವರು ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.

ಒಟ್ಟಾರೆಯಾಗಿ ಎಸ್ ಎಂ ಕೃಷ್ಣ ಅವರು ಪ್ರಮುಖ 10 ಚುನಾವಣೆಗಳನ್ನು ಎದುರಿಸಿದ್ದಾರೆ. 6 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದು, ಇವುಗಳಲ್ಲಿ 4 ರಲ್ಲಿ ಗೆಲುವು, 2 ಚುನಾವಣೆಯಲ್ಲಿ ಸೋಲನ್ನು ಅಭವಿಸಿದ್ದಾರೆ.

4 ಲೋಕಸಭಾ ಚುನಾವಣೆಗಳನ್ನು ಎದುರಿಸಿದ್ದು, ಈ ಪೈಕಿ 3 ಚುನಾವಣೆಯಲ್ಲಿ ಗೆಲುವು ಪಡೆದು, 1 ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದಾರೆ.

Ads on article

Advertise in articles 1

advertising articles 2

Advertise under the article