
ಮಂಡ್ಯ: ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು; ಆಯತಪ್ಪಿ ಬಿದ್ದು ಸಾವನ್ನಪ್ಪಿದ ಮೂರುವರೆ ವರ್ಷದ ಮಗು: ಮೂವರು ಎಎಸ್ಐಗಳು ಸಸ್ಪೆಂಡ್
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುರುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಈ ವೇಳೆ ಆಕ್ರೋಶಿತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮೂವರು ಎಎಸ್ಐಗಳ ಅಮಾನತು
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ. ASIಗಳಾದ ಜಯರಾಮ್, ನಾಗರಾಜ್, ಗುರುದೇವ್ ಅಮಾನತುಗೊಂಡವರು.