
ಒಳಮೀಸಲಾತಿಗಾಗಿ ಪರಿಶಿಷ್ಟರ ಸಮೀಕ್ಷೆ: ಉಡುಪಿ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟ ವಿರೋಧ
ಉಡುಪಿ: ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ 'ಮೇರಾ' ಮತ್ತು 'ಮಾನ್ಸಾ' ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮವನ್ನು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟವು ವಿರೋಧಿಸಿದೆ. ಅಲ್ಲದೆ, ಜಿಲ್ಲಾಧಿಕಾರಿಗಳ ಕ್ರಮ "ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ' ಎಂದು ಆಕ್ರೋಶ ವ್ಯಕ್ತಪಡುಸಿವೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು, 'ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ "ಮೇರಾ" ಮತ್ತು "ಮಾನ್ಸಾ' ಜಾತಿ ಎರಡರಲ್ಲಿ ಗೊಂದಲವಿದೆ. ಈ ಜಾತಿಯನ್ನು ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲಾಗಿದೆ' ಎಂದು ಒಳಮೀಸಲಾತಿ ಸಮೀಕ್ಷೆ ಕುರಿತು ಸುದ್ಧಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಇದು ಅತ್ಯಂತ ಆಘಾತಕಾರಿ, ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ ಕ್ರಮ ಎಂದರು. ಕರ್ನಾಟಕ ರಾಜ್ಯಕ್ಕೆ ಅಧಿಸೂಚಿತ ಪರಿಶಿಷ್ಟ ಜಾತಿಗಳ (101 ಜಾತಿಗಳು ಮಾತ್ರಾ) ಪಟ್ಟಿಯಲ್ಲಿ ಇಲ್ಲದ ಮೇರಾ ಮತ್ತು ಮನ್ಸ ಎಂಬ ಎರಡು ಜಾತಿಗಳನ್ನು ಆದಿದ್ರಾವಿಡ ಪಟ್ಟಿಯಲ್ಲಿ (?) ಸೇರಿಸಲು ಸಂವಿಧಾನ ವಿರೋಧಿಯಾಗಿ ಮತ್ತು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟು ಡಾ. ಕೆ. ವಿದ್ಯಾಕುಮಾರಿ ಅವರು ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಧ್ಯಕ್ಷರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ (ದೌರ್ಜನ್ಯ ತಡೆ) ಕಾಯ್ದೆ, 1989 (ತಿದ್ದುಪಡಿಗಳು ಸೇರಿದಂತೆ) ಮತ್ತು ನಿಯಮಾವಳಿ 1995 ರನ್ವಯ ಪರಿಶಿಷ್ಟ ಸಮುದಾಯಗಳ ದೌರ್ಜನ್ಯ ತಡೆ ಕುರಿತು ರಚನೆಯಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರ ಹುದ್ದೆಗಳ ಘನತೆಗೆ ಮತ್ತು ಕರ್ತವ್ಯಕ್ಕೆ ಚ್ಯುತಿ ತಂದಿದ್ದಾರೆ. ಭಾರತದ ಸಂವಿಧಾನದಡಿಯಲ್ಲಿ ಸಂಸತ್ತಿಗೆ ದತ್ತವಾಗಿರುವ ಈ ವಿಶೇಷ ಅಧಿಕಾರವನ್ನು ಓರ್ವ ಜಿಲ್ಲಾಧಿಕಾರಿ ಬಳಸಿರುವುದನ್ನು ಅಧಿಕಾರ ದುರ್ಬಳಕೆಯ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವರದಿಯನ್ನು ರಾಜ್ಯ ಸರಕಾರ ಮತ್ತು ನ್ಯಾ. ಎಚ್ ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗ ಮಾನ್ಯ ಮಾಡಬಾರದು ಮತ್ತು ಈ ನಿಟ್ಟಿನಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನು ಸಂಬಂಧ ಪಟ್ಟ ಎಲ್ಲರೂ ತುರ್ತಾಗಿ ಕೈಗೊಳ್ಳಬೇಕು ಎಂದು ಅವರು ಅಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಆದಿದ್ರಾವಿಡ ಸಮಾಜದ ರಾಜ್ಯ ಅಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ ಕೆ ರಾಜು ಮತ್ತಿತರರು ಉಪಸ್ಥಿತರಿದ್ದರು.