ಶಿವಮೊಗ್ಗ: ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯನ್ನು ಕೊಲೆ ಮಾಡಿದ ಪ್ರಿಯಕರ; ಕುಟುಂಬಸ್ಥರಿಂದ ದೂರು
ಶಿವಮೊಗ್ಗ: ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ ಮಾಡಿರುವಂತಹ ಘಟನೆಯೊಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ.
ಪ್ರೇಯಸಿ ಸ್ವಾತಿಯನ್ನು ಸೂರ್ಯ ಎಂಬಾತ ಕೊಲೆ ಮಾಡಿದ್ದು, ಕೊಲೆಯ ಬಳಿಕ ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸೂರ್ಯ ಮತ್ತು ಆತನ ತಂದೆ ಸ್ವಾಮಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಸೂರ್ಯ ಮತ್ತು ಸ್ವಾತಿ ಇಬ್ಬರು ಪ್ರೀತಿಸುತ್ತಿದ್ದರೆನ್ನಲಾಗಿದ್ದು, ಸ್ವಾತಿ ಪದವಿ ಎರಡನೇ ವರ್ಷ ವ್ಯಾಸಾಂಗ ಮಾಡುತ್ತಿದ್ದಳು. ಸೂರ್ಯ ಮದುವೆ ಆಗುವುದಕ್ಕೆ ಪೀಡಿಸುತ್ತಿದ್ದ. ಆದರೆ ಇತ್ತ ಸ್ವಾತಿ ಮನೆಯವರು ಓದು ಮುಗಿಯುವವರೆಗೆ ಮದುವೆ ಬೇಡ ಅಂದಿದ್ದಾರೆ. ಸೆ. 21ರಂದು ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿತ್ತು ಎಂದು ಹೇಳಲಾಗಿದೆ.
ಸೆ.21ರಂದು ಸ್ವಾತಿಯನ್ನು ಸೂರ್ಯ ಮನೆಯಿಂದ ಭದ್ರಾ ಕಾಲುವೆಗೆ ಕರೆದೊಯ್ದು ಅಲ್ಲಿಂದ ತಳ್ಳಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಮಂಗಳವಾರ ಸಂಜೆ ಯುವತಿಯ ಶವ ಪತ್ತೆಯಾಗಿದೆ. ಸ್ವಾತಿ ಕುಟುಂಬಸ್ಥರಿಂದ ಸೂರ್ಯ ಮತ್ತು ಕೊಲೆಗೆ ಕುಮ್ಮಕ್ಕು ಹಿನ್ನಲೆ ಆತನ ತಂದೆ ಸ್ವಾಮಿ ಮೇಲೆ ಸೆ. 23 ರಂದು ಭದ್ರಾವತಿ ಠಾಣೆಗೆ ದೂರು ನೀಡಿದ್ದರು.
ಭದ್ರಾವತಿ ಗ್ರಾಮಾಂತರ ಪೊಲೀಸರು ಎ1 ಸೂರ್ಯ ಮತ್ತು ಎ2 ಸ್ವಾಮಿ ವಿರುದ್ಧ ಕೊಲೆ ಕೇಸ್ ದಾಖಲಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.