
ಇನ್ಫೋಸಿಸ್ ಸಂಸ್ಥೆಯವರೆಂದರೆ ಬೃಹಸ್ಪತಿಗಳೇ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ -ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂದು ನಿರಾಕರಿಸಿರುವುದು ಭಾರೀ ಸುದ್ದಿಯಾಗಿದೆ. ಕಾಂಗ್ರೆಸ್ ನ ಹಲವು ನಾಯಕರು ದಂಪತಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಹೀಗೆ....
ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನರನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿದೆ, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಲಾಗಿದೆ.
ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ.