ರಾಜ್ಯ ಸರಕಾರ ಸಹಕಾರ ನೀಡಿದರೆ ಪಡುಬಿದ್ರೆ ಎರ್ಮಾಳು ವಿಮಾನ ನಿಲ್ದಾಣ: ಸಂಸದ ಕೋಟಗೆ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ
ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.
ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದರಿಂದ ಉಡುಪಿ ಜಿಲ್ಲೆಯ ಎರ್ಮಾಳಿನಲ್ಲಿ ಪ್ರಸ್ತಾಪಿತ ವಿಮಾನ ನಿಲ್ದಾಣದ ಬಗ್ಗೆ ಜಿಲ್ಲೆಯಲ್ಲಿ ಕುತೂಹಲ ಗರಿಗೆದರಿದೆ.
