ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮುಸ್ಲಿಮನೊಬ್ಬನಿರುತ್ತಿದ್ದರೆ ಇಷ್ಟೊತ್ತಿಗೆ ಎನ್‌ಕೌಂಟರ್ ಮಾಡಿ, ಮನೆ ಕೆಡವುತ್ತಿದ್ದರು: ಯುಪಿ ಸರಕಾರದ ವಿರುದ್ಧ ಓವೈಸಿ ವಾಗ್ದಾಳಿ

ನವದೆಹಲಿ: ರಾಮಮಂದಿರ  ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ರಾಮಮಂದಿರ ಟ್ರಸ್ಟ್‌ನಲ್ಲಿ ಮುಸ್ಲಿಂ ಇದ್ದಿದ್ದರೆ, ಸರ್ಕಾರವು ಈಗ ಅವನನ್ನು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಂದು ಮನೆಯನ್ನು ನೆಲಸಮ ಮಾಡುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. 

ಪ್ರಕರಣದಲ್ಲಿ ಕ್ರಮಕೈಗೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪ್ರಯತ್ನಿಸುತ್ತಿಲ್ಲ. ಅವರು ಒಬ್ಬ ಮುಸಲ್ಮಾನನನ್ನು ಟ್ರಸ್ಟ್‌ನಲ್ಲಿ ಇರಿಸಿಕೊಂಡು, ಅವನ ಎನ್‌ಕೌಂಟರ್ ಮೂಲಕ ಮತ್ತು ಅವನ ಮನೆಯನ್ನು ಕೆಡವಿ ಪ್ರಕರಣವನ್ನು ಮುಚ್ಚಬೇಕಾಗಿತ್ತು ಎಂದು ಸರ್ಕಾರವನ್ನು ಲೇವಡಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆಯೂ, ಓವೈಸಿ ಯುಪಿ ಸರ್ಕಾರವನ್ನು ಪ್ರಶ್ನಿಸಿದ್ದರು. ರಾಜ್ಯದಲ್ಲಿ ಮುಸ್ಲಿಮರಂತೆ ಆರೋಪಿಗಳ ಮನೆಗಳ ಮೇಲೆ ಗುಂಡು ಹಾರಿಸಲಾಗುತ್ತದೆಯೇ ಅಥವಾ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದ್ದು, ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ವಿರೋಧ ಪಕ್ಷಗಳು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.