‘ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆಗೆ ಭಾರೀ ಆಕ್ರೋಶ

ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ಕುರಿತು ಕುಹಕವಾಡಿರುವ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ. ಆತ ಬಂದು ನೀಟ್ ವಿರುದ್ಧ ಹೋರಾಟ ಅಂತೆ’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಈಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ಕುರಿತು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಟಿ ರವಿ,“ನೀಟ್‌ ಅಕ್ರಮ ವಿರೋಧಿಸಿ ನಡೆಯುತ್ತಿರುವ ಹೋರಾಟವು ಶಿಕ್ಷಣ ಸುಧಾರಣೆಗಾಗಿ ನಡೆಯುತ್ತಿಲ್ಲ. ‘ಧರ್ಮೇಂದ್ರ ಪ್ರಧಾನ್‌ ಹಠಾವೋ, ಮೋದಿ ರಾಜೀನಾಮೆ ನೀಡಬೇಕು’ ಎಂದು ಹೇಳುವ ತುಕ್ಡೆ ಗ್ಯಾಂಗ್‌ಗಳು ಮಾತನಾಡುತ್ತಿವೆ. ಅವರು ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿಂದಲ್ಲ, ಬೇರೆ ಕಾರಣಗಳಿಂದ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಸಿಜೆಪಿ ಮತ್ತು ಕಾಂಗ್ರೆಸ್‌ ಬೆಂಬಲದ ಪ್ರತಿಭಟನೆಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡಿವೆ. ವಿದ್ಯಾರ್ಥಿಗಳ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಅವರು ದೂರಿದ್ದಾರೆ.

“ನೀಟ್‌ ಅಕ್ರಮವನ್ನು ನೆಪ ಮಾಡಿಕೊಂಡು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸಲಾಗಿದೆ. ವಿದ್ಯಾರ್ಥಿಗಳ ಮೂಲಕ ದಂಗೆ ಎಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.