ದೇವೇಗೌಡರ ಪತ್ನಿ ಚೆನ್ನಮ್ಮರ ತಿಥಿಯ ದಿನ ಜೈಲಿನಿಂದ ಪ್ರಜ್ವಲ್ ರೇವಣ್ಣರನ್ನು ಕರೆತರುವುದಕ್ಕೆ ಕುಟುಂಬಸ್ಥರ ಯತ್ನ; ಕಾರಾಗೃಹ ಇಲಾಖೆ ಹೇಳಿದ್ದೇನು ?

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚಿಗೆ ನಿಧನರಾದ ಪ್ರಜ್ವಲ್‌ ರೇವಣ್ಣ ಅವರ ಅಜ್ಜಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಜೈಲಿನಿಂದ ಅವರನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಆದರೆ ಕಾರಾಗೃಹ ಇಲಾಖೆ, ಮಾಜಿ ಸಂಸದನಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ತಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದೆ.

ಇದೀಗ ಪ್ರಜ್ವಲ್ ಅವರ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, 15 ದಿನಗಳ ಕಾಲ ಪೆರೋಲ್ ಸಿಕ್ಕರೆ ಜುಲೈ 30ಕ್ಕೆ ನಿಗದಿಯಾಗಿರುವ ಅಜ್ಜಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲಿದ್ದಾರೆ.

ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಜೈಲಿನಲ್ಲಿ ಮಾತನಾಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು, ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.