ನವದೆಹಲಿ: ಇನ್ನೂ ಎರಡು ಬೇಡಿಕೆ ಈಡೇರಿಸಿ, ಪ್ರಧಾನಿ ಮೋದಿ (PM Modi) ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gnadhi) ಆಗ್ರಹಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ. ಇನ್ನೂ ಎರಡು ಬೇಡಿಕೆಗಳು ಈಡೇರಬೇಕಿದೆ. ಅದರ ನಂತರ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಬೇಕು ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದ ಎಲ್ಲಾ ವಿದ್ಯಾರ್ಥಿಗಳೇ, ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ. ರಸ್ತೆಗಿಳಿದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ನಿಮ್ಮೆಲ್ಲರ ಭವಿಷ್ಯಕ್ಕಾಗಿ ಹೋರಾಡಿದ ಎಲ್ಲ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ರೈತರು, ಕಾರ್ಮಿಕರು, ಬಡವರು ಸೇರಿದಂತೆ ಈ ಸರ್ಕಾರದಿಂದ ದಬ್ಬಾಳಿಕೆಗೆ ಒಳಗಾದ ಪ್ರತಿಯೊಬ್ಬರೂ ತಮ್ಮ ಗೌರವಕ್ಕಾಗಿ ಸಂವಿಧಾನಾತ್ಮಕವಾಗಿ ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ. ಭಯಪಡಬೇಡಿ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಸಮಯ ಬಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
