ಬಳ್ಳಾರಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ 10 ದಿನಗಳ 'ಬಳ್ಳಾರಿ ಚಲೋ' ಪಾದಯಾತ್ರೆ ಗುರುವಾರ ಮುಕ್ತಾಯಗೊಂಡಿದೆ.
ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳು ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ತಲಾ 200 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳು ಕಳಪೆ ರಸ್ತೆ ಮೂಲಸೌಕರ್ಯದಿಂದ ತೀವ್ರ ಸಮಸ್ಯೆ ಎದುರಿಸುತ್ತಿವೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಗ್ರಾಮೀಣ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿದೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲವನ್ನು ನಿಯಂತ್ರಿಸುವಲ್ಲಿಯೂ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ, ಈ ಪಿಡುಗನ್ನು ತಡೆಯುವ ಬಗ್ಗೆ ಸರ್ಕಾರಕ್ಕೆ ಗಂಭೀರ ಕಾಳಜಿ ಇಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ರೈತರನ್ನೂ ನಿರ್ಲಕ್ಷಿಸುತ್ತಿದೆ. ಬರ ಪರಿಹಾರ ಹಾಗೂ ರೈತರ ರೂ.5 ಲಕ್ಷದವರೆಗಿನ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿರುವುದನ್ನು ಟೀಕಿಸಿದರು.
ಇದೇ ವೇಳೆ ‘ಬಳ್ಳಾರಿ ಚಲೋ’ ಕಾರ್ಯಕ್ರಮ ಐತಿಹಾಸಿಕ ಯಶಸ್ಸು ಕಂಡಿದೆ ಎಂದು ಬಣ್ಣಿಸಿದ ವಿಜಯೇಂದ್ರ ಅವರು, ರೈತರು ಮತ್ತು ಬಡವರ ಪರವಾಗಿರುವ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವವರೆಗೆ ಬಿಜೆಪಿ ತನ್ನ ಹೋರಾಟ ಮುಂದುವರಿಸಲಿದೆ ಎಂದರು.
ಬಿಜೆಪಿಯ “ನಿಜವಾದ ಹೋರಾಟ” ಆರಂಭವಾಗಿದ್ದು, ಕರ್ನಾಟಕದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಅದು ಮುಂದುವರಿಯಲಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸುತ್ತಿದ್ದು, ಪರಿಶಿಷ್ಟ ಜಾತಿಗಳ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಮೀಸಲಿಟ್ಟಿದ್ದ ರೂ.45,000 ಕೋಟಿಯನ್ನು ಕಾಂಗ್ರೆಸ್ ಸರ್ಕಾರ ಇತರ ಇಲಾಖೆಗಳತ್ತ ವರ್ಗಾಯಿಸಿದೆ. ಆ ಹಣವನ್ನು ಮತ್ತೆ ಮೂಲ ಉದ್ದೇಶಕ್ಕೆ ಬಳಸಬೇಕು ಎಂದು ಆಗ್ರಹಿಸಿದರು.
ರೈತರು, ಬಡವರು ಹಾಗೂ ಹಿಂದುಳಿದ ಸಮುದಾಯಗಳನ್ನು ಇದೇ ರೀತಿ ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಉಂಟಾಗಲಿದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
